ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಭಾಗವತ, ಗಾನ ಗಂಧರ್ವರೆಂದೇ ಖ್ಯಾತರಾಗಿದ್ದ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಇಂದು ಬೆಳಿಗ್ಗೆ 7.30ಕ್ಕೆ ಹೃದಯಾಘಾತಕ್ಕೊಳಗಾಗಿ ವಿಧಿವಶರಾದರು ಎಂದು ತಿಳಿದುಬಂದಿದೆ.
ಗಣಪತಿ ಭಟ್ಟರು ಸುಮಾರು 4 ದಶಕಗಳಿಗೂ ಹೆಚ್ಚು ಕಾಲ ಯಕ್ಷರಂಗದಲ್ಲಿ ಭಾಗವತರಾಗಿ ಮೆರೆದಿದ್ದರು. ಸುರತ್ಕಲ್, ಕರ್ನಾಟಕ, ಹೊಸನಗರ, ಎಡನೀರು, ಹನುಮಗಿರಿ ಸೇರಿದಂತೆ ಹಲವು ವ್ಯವಸಾಯಿ ಯಕ್ಷಗಾನ ಮೇಳಗಳಲ್ಲಿ ಭಾಗವತರಾಗಿದ್ದರು.
ತೆಂಕುತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ಪದ್ಯಾಣ ಗಣಪತಿ ಭಟ್ಟರು ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಬಹುಬೇಗನೆ ಸಿದ್ಧಿಪ್ರಸಿದ್ಧಿ ಪಡೆದ ಅವರು ‘ಯಕ್ಷರತ್ನ’ ಬಿರುದಿಗೆ ಭಾಜನರಾಗಿದ್ದರು. ಇವರಿಗೆ ಯಕ್ಷಗಾನ ಮನೆತನದ ಬಳುವಳಿ. ಅಜ್ಜ ಪುಟ್ಟು ನಾರಾಯಣರು ಪ್ರಸಿದ್ಧ ಭಾಗವತರಾಗಿದ್ದರು. ತಂದೆ ಹಿಮ್ಮೇಳವಾದಕರಾಗಿದ್ದರು. ಪದ್ಯಾಣ ಮನೆತನ ಸಾಕಷ್ಟು ಕಲಾವಿದರನ್ನು ಈ ಕ್ಷೇತ್ರಕ್ಕೆ ನೀಡಿದೆ. ಪದ್ಯಾಣ ತಿರುಮಲೇಶ್ವರ ಭಟ್- ಸಾವಿತ್ರಿ ದಂಪತಿಗಳ ಸುಪುತ್ರರಾಗಿ ಜನಿಸಿದ ಇವರಿಗೆ ಮನೆಯೇ ಮೊದಲ ಯಕ್ಷಗಾನ ಪಾಠ ಶಾಲೆಯಾಯಿತು. ಮಾಂಬಾಡಿ ನಾರಾಯಣ ಭಾಗವತರಲ್ಲಿ ಭಾಗವತಿಕೆ ಅಭ್ಯಾಸ ಮಾಡಿ ಹದಿನೈದರ ಹರೆಯದಲ್ಲೆ ಯಕ್ಷರಂಗ ಪ್ರವೇಶಿಸಿದರು. ಚೌಡೇಶ್ವರಿ, ಕುಂಡಾವು, ಸುರತ್ಕಲ್, ಮಂಗಳಾದೇವಿ, ಎಡನೀರು, ಹೊಸನಗರ ಹಾಗೂ ಹನುಮಗಿರಿ ಮೇಳಗಳಲ್ಲಿ ಐದು ದಶಕಗಳ ಕಲಾಸೇವೆ ಗೈದಿರುತ್ತಾರೆ. ಕನ್ನಡ, ತುಳು ಎರಡೂ ಭಾಷೆಗಳಲ್ಲಿ ಸಮರ್ಥವಾಗಿ ಭಾಗವತಿಕೆ ಮಾಡಿ ಕಲಾರಸಿಕರ ಮನ ಗೆದ್ದಿದ್ದಾರೆ. ಸಂಗೀತ ಜ್ಞಾನವುಳ್ಳ ಪದ್ಯಾಣರು ಯಕ್ಷಗಾನದ ಪದ್ಯಗಳಿಗೆ ಹೊಸರಾಗ ಸಂಯೋಜನೆ ಮಾಡಿದ್ದಾರೆ. ಶೇಣಿ ಗೋಪಾಲಕೃಷ್ಣ ಭಟ್ಟರ ನೆಚ್ಚಿನ ಭಾಗವತರು. 1500ಕ್ಕೂ ಹೆಚ್ಚು ಧ್ವನಿಸುರುಳಿಗಳಲ್ಲಿ 200ಕ್ಕೂ ಹೆಚ್ಚು ಯಕ್ಷಗಾನದ ವಿಡಿಯೋಗಳಲ್ಲಿ ಇವರ ಸಿರಿಕಂಠದ ಧ್ವನಿ ದಾಖಲಾಗಿದೆ. ಹೊರನಾಡುಗಳಲ್ಲಿ ಹೊರರಾಷ್ಟ್ರಗಳಲ್ಲಿ ಯಕ್ಷಗಾನ ಆಟಕೂಟಗಳಲ್ಲಿ ಭಾಗವಹಿಸಿ ಮಧುರ ಹಾಡುಗಳಿಂದ ಕಾರ್ಯಕ್ರಮ ಕಳೆಗಟ್ಟಿಸಿದ್ದಾರೆ. ಹಿಮ್ಮೇಳದ ಎಲ್ಲ ಅಂಗಗಳಲ್ಲಿ ಪರಿಣಿತರಾದ ಇವರು ಅನೇಕ ಶಿಷ್ಯರಿಗೆ ತರಬೇತಿ ನೀಡಿದ್ದಾರೆ. ಕನ್ನಡಿಕಟ್ಟೆಯಂತಹ ಯುವ ಭಾಗವತರು ಇವರ ಗರಡಿಯಲ್ಲಿ ಸಿದ್ಧಗೊಂಡಿದ್ದಾರೆ. ನಿಡುಗಾಲದ ಯಕ್ಷಗಾನಕ್ಕೆ ಪುರಸ್ಕಾರ ರೂಪವಾಗಿ ಹಲವು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರು. ಉಡುಪಿಯ ಯಕ್ಷಗಾನ ಕಲಾರಂಗ ಅವರಿಗೆ ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ನ್ಯಾ. ದಾಮೋದರ ಶೆಟ್ಟಿ ಮಜಿಬೈಲು ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
