ಬೆಂಗಳೂರು : ಭಾರಿ ವಿವಾದಕ್ಕೆ ಕಾರಣವಾಗಿ ವಿಶ್ವಮಟ್ಟದಲ್ಲಿ ಗಮನ ಸೆಳೆದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳವಾರ ಬೆಳಗ್ಗೆ ತೀರ್ಪು ಪ್ರಕಟಿಸಿದ್ದು, ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದಿದೆ.
ಹಿಜಾಬ್ ಧರಿಸಿ ಶಾಲಾ-ಕಾಲೇಜಿನ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸುವ ಮತ್ತು ಸಮವಸ್ತ್ರವನ್ನು ನಿರ್ಧರಿಸುವ ಜವಾಬ್ದಾರಿಯನ್ನು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ (ಸಿಡಿಸಿ) ವಹಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿತ್ತು. ಈ ಆದೇಶ ರದ್ದು ಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಈ ಎಲ್ಲ ಅರ್ಜಿಗಳ ಕುರಿತು ಸತತ 11 ದಿನ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾ.ಜೆ.ಎಂ. ಖಾಜಿ ಅವರನ್ನು ಒಳಗೊಂಡ ಪೀಠ ಸರ್ಕಾರದ ಆದೆಶ ಕಾನೂನುಬದ್ಧವಾಗಿದೆ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಪಾಲನೆ ಮಾಡಬೇಕು ಎಂದಿದೆ.
ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ. ಜೊತೆಗೆ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
